ವಾರಾಣಸಿಯಲ್ಲಿ ಐತಿಹಾಸಿಕ, ಅತ್ಯಂತ ಪುರಾತನ ಪವಿತ್ರ ಶಿವನ ದೇಗುಲ ಕಾಶಿ ವಿಶ್ವನಾಥ ಮಂದಿರದ ಸಂಕೀರ್ಣದಲ್ಲಿ ಕೈಗೊಂಡ ಹಲವು ಅಭಿವೃದ್ಧಿ ಕಾರ್ಯಗಳು ಪೂರ್ಣಗೊಂಡಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ಡಿಸೆಂಬರ್ 13 ರಂದು ಉದ್ಘಾಟಿಸಲಿದ್ದಾರೆ.
ಕಾಶಿ ವಿಶ್ವನಾಥ ಕಾರಿಡಾರ್ ಯೋಜನೆ ಉದ್ಘಾಟನೆ ಸೇರಿದಂತೆ ಹಲವು ಕಾರ್ಯಕ್ರಮಗಳ ನಿಮಿತ್ತ ಪ್ರಧಾನಿ ಮೋದಿ ತಮ್ಮ ಸ್ವಕ್ಷೇತ್ರಕ್ಕೆ ಎರಡು ದಿನಗಳ ಪ್ರವಾಸ ಕೈಗೊಳ್ಳಲಿದ್ದಾರೆ.
ಭಕ್ತರಿಗೆ ಪಾದಾಚಾರಿ ವ್ಯವಸ್ಥೆ, ಹಲವು ಸಭಾಂಗಣ, ಸುಸಜ್ಜಿತ ಕಟ್ಟಡ, ಮೂಲಭೂತ ಸೌಕರ್ಯ, ಆಧ್ಯಾತ್ಮಿಕ ಗ್ರಂಥಾಲಯ, ವರ್ಚುವಲ್ ಗ್ಯಾಲರಿ ಸೇರಿದಂತೆ ಹಲವು ಕಾಮಗಾರಿಗಳನ್ನು ಕಾಶಿ ವಿಶ್ವನಾಥ ಕಾರಿಡಾರ್ ಯೋಜನೆಯಲ್ಲಿ ಕೈಗೆತ್ತಿಕೊಳ್ಳಲಾಗಿತ್ತು. ಇದೀಗ ಈ ಯೋಜನೆ ಪೂರ್ಣಗೊಂಡಿದ್ದು, ಪ್ರಧಾನಿ ಮೋದಿ ಉದ್ಘಾಟನೆ ಮಾಡಲಿದ್ದಾರೆ.